ಹೊಸದಿಲ್ಲಿ: ಕೇಂದ್ರ ಸರಕಾರವು ಹೊಸ ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಬೇಕೆಂದು ಗುರುವಾರ ಸಲಹೆ ನೀಡಿರುವ ಸುಪ್ರೀಂಕೋರ್ಟ್, ಇದು ರೈತರೊಂದಿಗೆ ಮಾತುಕತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ.
ನ್ಯಾಯಾಲಯವು ಈ ವಿಷಯದ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳುವವರಗೆ ಕೃಷಿ ಕಾನೂನನ್ನು ಜಾರಿಗೆ ತರಲು ಸರಕಾರ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಸೂಚಿಸಿತು.
ಕೃಷಿ ಕಾಯ್ದೆಗಳ ಅನುಷ್ಠಾನವನ್ನು ತಡೆ ಹಿಡಿದರೆ, ರೈತರು ಮಾತುಕತೆಗೆ ಮುಂದೆ ಬರುವುದಿಲ್ಲ ಎಂದು ಕೇಂದ್ರ ಸರಕಾರ ವಾದಿಸಿತು.
ಕೇಂದ್ರ ಸರಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಇದೀಗ 22ನೇ ದಿನಕ್ಕೆ ಕಾಲಿಟ್ಟಿದೆ. ದಿಲ್ಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತೆರವುಗೊಳಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಗಳ ಗುಚ್ಚವನ್ನು ಸುಪ್ರೀಂಕೋರ್ಟ್ ಗುರುವಾರ ವಿಚಾರಣೆಗೆ ಕೈಗೆತ್ತಿಕೊಂಡಿದೆ.