ಸೇಲಂ : ಭಾರತ ಮತ್ತು ಚೀನಾದ ನಡುವೆ ಒಂಬತ್ತು ಸುತ್ತಿನ ಮಾತುಕತೆ ನಡೆದ ಬಳಿಕ ಪೂರ್ವ ಲಡಾಕ್ನಲ್ಲಿ ಭಾರತ ಮತ್ತು ಚೀನಾ ಸೇನೆ ಹಿಂಪಡೆಯುವ ಪ್ರಕ್ರಿಯೆ ‘ಪೂರ್ಣಗೊಂಡಿದೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.
ಭಾರತೀಯ ಜನತಾ ಯುವ ಮೋರ್ಚಾ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು ‘ಒಂಬತ್ತು ಸುತ್ತಿನ ಸೇನಾ ಮತ್ತು ರಾಜತಾಂತ್ರಿಕ ಸಂವಾದದ ನಂತರ, ಸೇನೆ ಹಿಂಪಡೆಯುವ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ ದುರದೃಷ್ಟವಶಾತ್ ಕಾಂಗ್ರೆಸ್, ಭಾರತೀಯ ಸೇನೆಯ ಶೌರ್ಯವನ್ನು ಅನುಮಾನಿಸುತ್ತಿದೆ. ಇದು ದೇಶಕ್ಕಾಗಿ ಹುತಾತ್ಮರಾಗುತ್ತಿರುವ ಸೈನಿಕರಿಗೆ ಮಾಡುತ್ತಿರುವ ಅವಮಾನವಲ್ಲವೇ’ ಎಂದು ಅವರು ಪ್ರಶ್ನಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರವು ‘ದೇಶದ ಏಕತೆ, ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವದ ವಿಚಾರದಲ್ಲಿ ಎಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಮಾಡುವುದಿಲ್ಲ’ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.